ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ ನೂರಾರು ಕ್ರಿಶ್ಚಿಯನ್ನರಿಂದ 3-4 ಲಕ್ಷ ಹಣ ಪಡೆದು ವಂಚನೆ, ಬೆಂಗಳೂರಿನಲ್ಲಿ ವಂಚಕ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ  

29-10-25 10:43 pm       Mangalore Correspondent   ಕ್ರೈಂ

ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು.  ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.

ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.

ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.

ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.