ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕೆ ಉರುಳಿ ಬಿತ್ತು ಆರು ಮಂದಿಯ ಹೆಣ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬದವರ ಮೇಲೆ ಗುಂಡಿನ ದಾಳಿ, ಬೆಚ್ಚಿಬಿದ್ದ ಖಾಕಿ!

29-05-26 10:21 pm       HK News Staffer   ಕ್ರೈಂ

ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸುವಂತಹ ಭೀಕರ ಸಾಮೂಹಿಕ ಹತ್ಯೆ ಪ್ರಕರಣ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆ 15ರಿಂದ 20 ಮಂದಿಯ ಗುಂಪೊಂದು ಕುಟುಂಬದ ಸದಸ್ಯರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.

ವಿಜಯಪುರ, ಮೇ 29: ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸುವಂತಹ ಭೀಕರ ಸಾಮೂಹಿಕ ಹತ್ಯೆ ಪ್ರಕರಣ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆ 15ರಿಂದ 20 ಮಂದಿಯ ಗುಂಪೊಂದು ಕುಟುಂಬದ ಸದಸ್ಯರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಶಬ್ಬೀರ್ ನದಾಫ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಗೋವಿಂದಪುರ ಗ್ರಾಮದ ವಿವಾದಿತ 24 ಎಕರೆ ಜಮೀನನ್ನು ನಿರಾಳೆ ಕುಟುಂಬ ಆರು ತಿಂಗಳ ಹಿಂದೆ ಖರೀದಿಸಿತ್ತು. ಈ ಜಮೀನು ಖರೀದಿಸಬಾರದು ಎಂದು ಗ್ರಾಮದ ಅಪ್ಪುಗೌಡ ಪಾಟೀಲ್ ಹಾಗೂ ಇತರರು ಎಚ್ಚರಿಕೆ ನೀಡಿದ್ದರೆನ್ನಲಾಗಿದೆ. ಆದರೂ ಜಮೀನು ಖರೀದಿ ಮಾಡಿದ್ದ ನಿರಾಳೆ ಕುಟುಂಬದವರು ಟ್ರ್ಯಾಕ್ಟರ್ ಮತ್ತು ಜೆಸಿಬಿ ಬಳಸಿ ಭೂಮಿಯನ್ನು ಕೃಷಿಗೆ ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಹೊಲದಲ್ಲೇ ಕುಟುಂಬದವರನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಜಮೀನು ವಿವಾದದ ಸಂಬಂಧ ಕೆಲ ದಿನಗಳ ಹಿಂದಷ್ಟೇ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ ನಿರಾಳೆ ಕುಟುಂಬಗಳ ನಡುವೆ ರಾಜಿ ಪಂಚಾಯತಿ ನಡೆದಿತ್ತು. ಆದರೆ ಕಲಹ ಶಮನವಾಗದೆ ಅಂತಿಮವಾಗಿ ರಕ್ತಪಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.