ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರು ಯುವಕರ ಬಂಧನ

06-06-26 04:59 pm       HK News Staffer   ಕ್ರೈಂ

ರಾಜ್ಯದಲ್ಲಿ ವಿದೇಶಿ ಉಗ್ರರ ಜಾಲ ಮತ್ತು ಸ್ಲೀಪರ್ ಸೆಲ್‌ಗಳ ಚಟುವಟಿಕೆಗಳ ಬಗ್ಗೆ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದೇಶದ ಭದ್ರತೆಗೆ ಧಕ್ಕೆ ಉಂಟುಮಾಡುವ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಜೂನ್ 6: ರಾಜ್ಯದಲ್ಲಿ ವಿದೇಶಿ ಉಗ್ರರ ಜಾಲ ಮತ್ತು ಸ್ಲೀಪರ್ ಸೆಲ್‌ಗಳ ಚಟುವಟಿಕೆಗಳ ಬಗ್ಗೆ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದೇಶದ ಭದ್ರತೆಗೆ ಧಕ್ಕೆ ಉಂಟುಮಾಡುವ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತುಮಕೂರು ನಿವಾಸಿ ಅಲ್ಲಾಬಕ್ಷು (24) ಹಾಗೂ ದಾವಣಗೆರೆಯ ಜಮೀರ್ ಖಾನ್ (22) ಎಂದು ಗುರುತಿಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ದೊರೆತ ಮಹತ್ವದ ಮಾಹಿತಿಯ ಆಧಾರದ ಮೇಲೆ ತುಮಕೂರು ಹಾಗೂ ದಾವಣಗೆರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ರೈಲ್ವೆ ನಿಲ್ದಾಣದ ಸಿಸಿಟಿವಿಯಿಂದ ಸುಳಿವು;

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ರೈಲ್ವೆ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಚಲನವಲನವನ್ನು ಪತ್ತೆ ಹಚ್ಚಲಾಗಿದೆ. ಬೇರೆಡೆಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಇಬ್ಬರನ್ನೂ ಬಂಧಿಸಲಾಗಿದೆ.

ಐಸಿಸ್ ಸಂಪರ್ಕದ ಶಂಕೆ;

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಾಕಿಸ್ತಾನ ಮೂಲದ ಐಸಿಸ್ ಪರ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಸ್ಫೋಟಕ ಕೃತ್ಯಗಳನ್ನು ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಿಂದ ಲಭ್ಯವಾಗಿದೆ.

ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ
ಕಳೆದ ಒಂದು ತಿಂಗಳ ಹಿಂದೆ ಪಾಕಿಸ್ತಾನ ಮೂಲದ ‘ರಾಣಾ’ ಎಂಬಾತ ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಬಳಿಕ ಎಕ್ಸ್ (ಟ್ವಿಟರ್) ಮತ್ತು ವಾಟ್ಸ್‌ಆ್ಯಪ್ ಮೂಲಕ ಸಂವಹನ ಮುಂದುವರಿದಿತ್ತು.

ಆರಂಭದಲ್ಲಿ ಧಾರ್ಮಿಕ ವಿಷಯಗಳ ಕುರಿತು ಚರ್ಚೆ ನಡೆಸುತ್ತಿದ್ದ ಗುಂಪು, ನಂತರ ದೇಶವಿರೋಧಿ ಮತ್ತು ಪ್ರಚೋದನಾತ್ಮಕ ಸಂದೇಶಗಳನ್ನು ಹಂಚಿಕೊಳ್ಳಲು ಬಳಸಲಾಗುತ್ತಿತ್ತು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಚರ್ಚೆ;

ವಾಟ್ಸ್‌ಆ್ಯಪ್ ಗುಂಪೊಂದರಲ್ಲಿ ಉತ್ತರ ಭಾರತದ ಹಲವು ಯುವಕರನ್ನು ಸೇರಿಸಿಕೊಳ್ಳಲಾಗಿತ್ತು. ಇತ್ತೀಚಿನ ಕೆಲವು ಘಟನೆಗಳಿಗೆ ಪ್ರತಿಕಾರ ತೀರಿಸಿಕೊಳ್ಳುವ ಕುರಿತು ಚರ್ಚೆಗಳು ನಡೆದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ರಾಜ್ಯ ಪೊಲೀಸರನ್ನು ಎಚ್ಚರಿಸಲಾಗಿತ್ತು.

ಮೊದಲಿಗೆ ತುಮಕೂರಿನಲ್ಲಿ ಅಲ್ಲಾಬಕ್ಷುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದಾವಣಗೆರೆಯ ಜಮೀರ್ ಖಾನ್ ಹೆಸರು ಬೆಳಕಿಗೆ ಬಂದಿದೆ. ಸದ್ಯ ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ರಾಜ್ಯದಲ್ಲಿ ಸಕ್ರಿಯವಾಗಿರಬಹುದಾದ ಇತರೆ ಸಂಪರ್ಕಗಳು ಮತ್ತು ಶಂಕಿತ ಸ್ಲೀಪರ್ ಸೆಲ್ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ.