ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಘಟನೆ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಅರ್ಜಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

13-07-26 08:31 pm       HK News Staffer   ಕ್ರೈಂ

ಕಳೆದ ವರ್ಷ ಮಳೆಗಾಲದಲ್ಲಿ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಮಂಗಳೂರು, ಜುಲೈ 13 : ಕಳೆದ ವರ್ಷ ಮಳೆಗಾಲದಲ್ಲಿ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನೋಟಿಸ್ ಜಾರಿಗೊಳಿಸಿದೆ.

2025ರ ಮೇ 30ರಂದು ಸಂಭವಿಸಿದ ದುರಂತದಲ್ಲಿ ಇಬ್ಬರು ಮಕ್ಕಳು ಮತ್ತು ಅಜ್ಜಿ ಸಾವನ್ನಪ್ಪಿದ್ದು ಮಕ್ಕಳ ಜೊತೆಗಿದ್ದ ತಾಯಿ ಅಶ್ವಿನಿ ಗಂಭೀರ ಗಾಯಗೊಂಡು ಎರಡೂ ಕಾಲುಗಳನ್ನು ಕಳಕೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಆದರೆ ಈ ಘಟನೆಗೆ ಗುಡ್ಡದ ಮೇಲ್ಬಾಗದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆಗಾಗಿ ಅಗೆದಿರುವುದು ಮತ್ತು ಮುಂಜಾಗ್ರತೆ ವಹಿಸದಿರುವುದು ಕಾರಣ ಎಂದು ಎನ್ಐಟಿಕೆ ತಜ್ಞರು ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೋರಿದೆ.

ಅರ್ಜಿಯಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿಯೇ ಭೂಕುಸಿತಕ್ಕೆ ಕಾರಣವಾಗಿದೆ ಎನ್ನುವ ಕುರಿತ ಎನ್ಐಟಿಕೆ ತಜ್ಞರ ವರದಿಯನ್ನು ಗಮನ ಬೆಳೆಯಲಾಗಿದೆ. ಅಲ್ಲದೆ, ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿದೆ. ಅಲ್ಲದೆ, ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಗಳು, ವಿಶೇಷವಾಗಿ IRC:SP:20-2002 ಹಾಗೂ IRC:SP:48 (Hill Road Manual) ಸೇರಿದಂತೆ ಅನ್ವಯಿಸುವ ತಾಂತ್ರಿಕ ಮಾನದಂಡಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಸ್ವತಂತ್ರ ಇಂಜಿನಿಯರ್‌ ಮತ್ತು ಭೂತಾಂತ್ರಿಕ ತಜ್ಞರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚಿಸುವಂತೆ ಮನವಿ ಮಾಡಲಾಗಿದೆ.

ಭೂಕುಸಿತದಿಂದ ಮೃತಪಟ್ಟವರ ಕುಟುಂಬಗಳು, ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದವರು ಹಾಗೂ ಆಸ್ತಿ ನಷ್ಟ ಅನುಭವಿಸಿದ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಜೊತೆಗೆ ನಿರ್ಲಕ್ಷ್ಯದಿಂದ ರಸ್ತೆ ಕಾಮಗಾರಿ ಜಾರಿಗೊಳಿಸಿದ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಇತರ ಹೊಣೆಗಾರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ನಿರ್ದೇಶನವನ್ನು ಕೋರಲಾಗಿದೆ.

ಪ್ರಕರಣದಲ್ಲಿ ಹೈಕೋರ್ಟ್ ಎಂಟ್ರಿಯಾಗಿರುವುದು ರಸ್ತೆ ಕಾಮಗಾರಿಯಲ್ಲಿ ಸಾರ್ವಜನಿಕ ಸುರಕ್ಷತೆ, ರಸ್ತೆ ನಿರ್ಮಾಣದ ಗುಣಮಟ್ಟ, ಆಡಳಿತದ ಹೊಣೆಗಾರಿಕೆ ಹಾಗೂ ದುರಂತಗಳ ನಿರ್ವಹಣೆ ಕುರಿತು ಮಹತ್ವದ ಕಾನೂನು ಪರೀಕ್ಷೆಯಾಗಿ ಪರಿವರ್ತನೆಯಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಗಮನ ಸೆಳೆದಿದೆ.