ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್ಚ್ ಎದುರೇ ಉದ್ಯಮಿಯ ಜೀವ ಬಲಿ

31-07-26 12:00 pm       HK News Staffer   ಕ್ರೈಂ

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಸಿನಿಮೀಯ ರೀತಿಯಲ್ಲಿ ಶೂಟೌಟ್‌ ನಡೆದಿದು 45 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದ ಈ ಗುಂಡಿನ ದಾಳಿ ಕರಾವಳಿ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕುಂದಾಪುರ, ಜು.31: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಸಿನಿಮೀಯ ರೀತಿಯಲ್ಲಿ ಶೂಟೌಟ್‌ ನಡೆದಿದು 45 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದ ಈ ಗುಂಡಿನ ದಾಳಿ ಕರಾವಳಿ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮೃತರನ್ನು ಬೈಂದೂರು ತಾಲೂಕಿನ ಬಾರ್ಕೂರು ಕಚೂರ್ ನಿವಾಸಿ ಇವಾನ್ ರಿಚರ್ಡ್ ಮಸ್ಕರೇನ್ಹಾಸ್ (45) ಎಂದು ಗುರುತಿಸಲಾಗಿದೆ. ಮೃತ ಇವಾನ್ ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದು, ವೈಯಕ್ತಿಕ ಕಾರಣಗಳಿಂದ ಮೊದಲ ಪತ್ನಿಯಿಂದ ದೂರವಾಗಿ ಬಾರ್ಕೂರು ಮೂಲದ ಮಹಿಳೆಯೊಬ್ಬರೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಮುಂಜಾನೆ ಸುಮಾರು 3.30ರ ವೇಳೆಗೆ ಇವಾನ್ ಬೇರೆ ಮಹಿಳೆಯೊಂದಿಗೆ ಕಾರಿನಲ್ಲಿ ಹೋಲಿ ರೋಸರಿ ಚರ್ಚ್ ಸಮೀಪಕ್ಕೆ ಬಂದಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಯೊಬ್ಬ ಪಿಸ್ತೂಲ್‌ನಿಂದ ಏಕಾಏಕಿ ಗುಂಡು ಹಾರಿಸಿದ್ದು, ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಇವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾಳಿ ನಡೆಸಿದ ಆರೋಪಿ ತಕ್ಷಣವೇ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನಾ ವೇಳೆ ಇವಾನ್ ಅವರೊಂದಿಗೆ ಇದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವ ಸಾಧ್ಯತೆ ಇದ್ದು, ಆಕೆಯಿಂದ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕುತ್ತಿದ್ದಾರೆ.

ಹತ್ಯೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ಬಹಿರಂಗವಾಗಬೇಕಿದ್ದು, ಹಣಕಾಸು ವ್ಯವಹಾರ, ವೈಯಕ್ತಿಕ ವೈಷಮ್ಯ ಅಥವಾ ಇತರೆ ವ್ಯವಹಾರ ಸಂಬಂಧಿತ ಕಾರಣಗಳಿದೆಯೇ ಎಂಬ ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಕುಂದಾಪುರ ಪೊಲೀಸರು ಹಾಗೂ ಎಸ್‌ಒಸಿಒ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನ್ಯಾಯ ವಿಜ್ಞಾನ ಸಂಬಂಧಿತ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ವಿಶೇಷ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.