ಸಿಎಂ ವಿಜಯ್, ನಟಿ ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಉದಯನಿಧಿ ಸ್ಟಾಲಿನ್ ಡ್ರಾಮಾಟಿಕ್‌ ಬಂಧನ..!

04-08-26 02:46 pm       HK News Staffer   ಕ್ರೈಂ

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ನೀಡಿದ ಭಾಷಣವೇ ಈಗ ರಾಜಕೀಯ ಬಿರುಗಾಳಿಗೆ ಕಾರಣವಾಗಿದ್ದು, ನೀಲಂಕರೈನಲ್ಲಿರುವ ಅವರ ನಿವಾಸಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚೆನ್ನೈ, ಆಗಸ್ಟ್ 04: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ನೀಡಿದ ಭಾಷಣವೇ ಈಗ ರಾಜಕೀಯ ಬಿರುಗಾಳಿಗೆ ಕಾರಣವಾಗಿದ್ದು, ನೀಲಂಕರೈನಲ್ಲಿರುವ ಅವರ ನಿವಾಸಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಂಜಾವೂರಿನಲ್ಲಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಖಂಡಿಸುವ ಜೊತೆಗೆ ಡೆಲ್ಟಾ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಒತ್ತಾಯಿಸಿ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಮುಖ್ಯಮಂತ್ರಿ ವಿಜಯ್ ವಿರುದ್ಧ ಅವರು ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಡಳಿತ ಪಕ್ಷದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.

ಈ ಭಾಷಣದ ಬಳಿಕ ತಂಜಾವೂರಿನ ಮಹಿಳೆಯೊಬ್ಬರು ಉದಯನಿಧಿ ವಿರುದ್ಧ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನೀಲಂಕರೈನಲ್ಲಿರುವ ಉದಯನಿಧಿ ಸ್ಟಾಲಿನ್ ಅವರ ನಿವಾಸಕ್ಕೆ ತೆರಳಿ ಬಂಧನ ಕಾರ್ಯಾಚರಣೆ ನಡೆಸಿದರು.

ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, "ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ನಾನು ಹೆದರುವುದಿಲ್ಲ. ಪರಿಣಾಮಗಳನ್ನು ಎದುರಿಸಲು ನಾನು ಸಂಪೂರ್ಣ ಸಿದ್ಧನಿದ್ದೇನೆ" ಎಂದು ತಿರುಗೇಟು ನೀಡಿದರು.

ತ್ರಿಶಾ ಹೆಸರು ಉಲ್ಲೇಖಿಸಿ ಮಾಡಿದ ಹೇಳಿಕೆ ವೈರಲ್ ;

ಕಾವೇರಿ ಪ್ರತಿಭಟನೆಯ ವೇಳೆ ನಟಿ ತ್ರಿಶಾ ಅವರನ್ನು ಉಲ್ಲೇಖಿಸಿ ಉದಯನಿಧಿ ನೀಡಿದ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೇಳಿಕೆಯನ್ನು ವಿರೋಧ ಪಕ್ಷಗಳು ಹಾಗೂ ನೆಟ್ಟಿಗರು ಡಬಲ್ ಮೀನಿಂಗ್ ಹೇಳಿಕೆ ಎಂದು ಟೀಕಿಸಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.

ಭಾಷಣದಲ್ಲಿ, "ಕಾವೇರಿ ನೀರಿನ ಒಂದು ಹನಿಯೂ ಸಿಕ್ಕಿಲ್ಲ. ಆದರೆ ಮುಖ್ಯಮಂತ್ರಿ ವಿಜಯ್ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದರ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದಾರೆ" ಎಂದು ಆರೋಪಿಸಿದ ಉದಯನಿಧಿ, "ನೀರು ಬೇರೆಡೆಗೆ ತಲುಪಲಿ ಅಥವಾ ತಲುಪದಿರಲಿ, ಅದು ಅಲ್ಲಿಗೆ ತಲುಪಬೇಕು" ಎಂದು ಹೇಳಿ ಬಳಿಕ ಅದು ಕಾವೇರಿ ನೀರಿನ ಉಲ್ಲೇಖ ಎಂದು ಸ್ಪಷ್ಟಪಡಿಸಿದ್ದರು.

ಹೈಕೋರ್ಟ್ ಮೊರೆ ಹೋದ ಡಿಎಂಕೆ;

ಬಂಧನದ ವಿರುದ್ಧ ಡಿಎಂಕೆ ಪರವಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದ್ದು, ಅಷ್ಟರವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸರ್ಕಾರಿ ಅಭಿಯೋಜಕರ ಮೂಲಕ ಪೊಲೀಸರಿಗೆ ಸೂಚನೆ ನೀಡಿತ್ತು. ಆದರೆ ನಂತರ ಪೊಲೀಸರು ಉದಯನಿಧಿಯನ್ನು ಬಂಧಿಸಿದ್ದು, ಪ್ರಕರಣ ಇದೀಗ ಮತ್ತಷ್ಟು ರಾಜಕೀಯ ಸ್ವರೂಪ ಪಡೆದುಕೊಂಡಿದೆ.