Udupi David Dsouza Murder, Arrest: ಉಡುಪಿ ಡೇವಿಡ್ ಡಿಸೋಜಾ ಹತ್ಯೆ ; ಉತ್ತರ ಭಾರತದ ಮೂವರು ಶಾರ್ಪ್ ಶೂಟರ್‌ಗಳ ಬಂಧನ, ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಪ್ರಮುಖ ಹಂತಕನ ಕಾಲಿಗೆ ಗುಂಡೇಟು

08-08-26 11:39 am       HK News Staffer   ಕ್ರೈಂ

ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣಕಾಸಿನ ವಿಚಾರವಾಗಿ ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಉಡುಪಿ , ಆ. 8: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣಕಾಸಿನ ವಿಚಾರವಾಗಿ ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜಾ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಉಡುಪಿ ಪೊಲೀಸರು, ಕೆಲವೇ ಗಂಟೆಗಳಲ್ಲಿ ಹತ್ಯೆಯ ಹಿಂದೆ ಇರುವ ಜಾಲದ ಸುಳಿವು ಪತ್ತೆಹಚ್ಚಿದ್ದಾರೆ.

ಯುಪಿ, ಜಾರ್ಖಂಡ್, ಬಿಹಾರದಿಂದ ಬಂದ ಶಾರ್ಪ್ ಶೂಟರ್‌ಗಳು!

ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್‌ಗಳಿಗೆ ಸುಪಾರಿ ನೀಡಲಾಗಿತ್ತು ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ. ಸುಪಾರಿ ಪಡೆದ ಮೂವರ ತಂಡ ಮುದರಂಗಡಿಗೆ ಆಗಮಿಸಿ, ಡೇವಿಡ್ ಡಿಸೋಜಾ ಅವರ ಕಚೇರಿ ಬಳಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದೆ ಎನ್ನಲಾಗಿದೆ.

ಮಿಂಚಿನ ಕಾರ್ಯಾಚರಣೆ; ಮೂವರು ಅರೆಸ್ಟ್!

ಹತ್ಯೆ ನಡೆದ ಬೆನ್ನಲ್ಲೇ ಉಡುಪಿ ಪೊಲೀಸರು ಆರೋಪಿಗಳಿಗಾಗಿ ಕಾರ್ಯಾಚರಣೆ ಆರಂಭಿಸಿದ್ದರು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಶಿರೂರು ಸಮೀಪ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ಪೈಕಿ ಓರ್ವನನ್ನು ರಾಜು ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳು ಹಲವು ರೀತಿಯ ನಕಲಿ ಗುರುತಿನ ಚೀಟಿಗಳನ್ನು ಹೊಂದಿದ್ದರು ಎನ್ನಲಾಗಿದ್ದು, ಅವರ ಸಂಪೂರ್ಣ ಗುರುತು ಹಾಗೂ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸುಪಾರಿ ಕೊಟ್ಟವರು ಯಾರು?

ಡೇವಿಡ್ ಡಿಸೋಜಾ ಹತ್ಯೆಯ ಹಿಂದೆ ಹಣಕಾಸಿನ ವ್ಯವಹಾರವೇ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಸುಪಾರಿ ನೀಡಿದ ಪ್ರಮುಖ ಆರೋಪಿಗಳು ಯಾರು? ಹತ್ಯೆಗೆ ಎಷ್ಟು ಹಣದ ಡೀಲ್ ನಡೆದಿತ್ತು? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹಾಡಹಗಲೇ ನಡೆದಿದ್ದ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳ ಬಂಧನವಾಗಿರುವುದು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇದೀಗ ಸುಪಾರಿ ನೀಡಿದ ಮಾಸ್ಟರ್‌ಮೈಂಡ್‌ಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶ ಮೂಲದ ಶೂಟರ್ ರಾಜುನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಕಾಪು ಎಸ್‌ಐ ತೇಜಸ್ವಿ ಅವರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸರ್ವೀಸ್ ಪಿಸ್ತೂಲ್‌ನಿಂದ ಫೈರ್ ;

ಈ ವೇಳೆ ಆತ್ಮರಕ್ಷಣೆಗಾಗಿ ಕಾಪು ಎಸ್‌ಐ ತೇಜಸ್ವಿ ಅವರು ತಮ್ಮ ಸರ್ವೀಸ್ ಪಿಸ್ತೂಲ್‌ನಿಂದ ಆರೋಪಿ ರಾಜುವಿನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರಾಜುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವೇಳೆ ಎಸ್‌ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್‌ಐ ಅವರ ಆರೋಗ್ಯ ವಿಚಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಪ್ರಮುಖ ಆರೋಪಿ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮುದರಂಗಡಿಯಲ್ಲಿ ನಡೆದ ಹಾಡಹಗಲೇ ಶೂಟೌಟ್ ಪ್ರಕರಣದ ಬೆನ್ನಲ್ಲೇ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವುದು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಬಂಧಿತ ಮೂವರು ಶಾರ್ಪ್ ಶೂಟರ್‌ಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಇವರ ಹಿಂದೆ ಇರುವ ವ್ಯಕ್ತಿಗಳು ಹಾಗೂ ಹತ್ಯೆಯ ಸಂಪೂರ್ಣ ಜಾಲದ ಬಗ್ಗೆ ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆಯಿದೆ.