ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್‌ ; ತನಿಖೆಗೆ ತೆರಳಿದ್ದ ಬೆಂಗಳೂರಿನ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್‌ ಬಲಿ, ನಾಲ್ವರ ದುರ್ಮರಣ, 11 ಮಂದಿಗೆ ಗಾಯ

28-08-26 07:40 pm       HK News Staffer   ಕ್ರೈಂ

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿದೆ. ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಭೋಪಾಲ್, ಆಗಸ್ಟ್ 28: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿದೆ. ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಭೋಪಾಲ್ ಬೈಪಾಸ್‌ನ ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಕೆಲವರು ಹೊರಕ್ಕೆ ಎಸೆಯಲ್ಪಟ್ಟು ಸುಮಾರು 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೈಬರ್ ಕ್ರೈಂ ತಂಡಕ್ಕೆ ಭಾರಿ ಆಘಾತ;

ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ. ಮೃತಪಟ್ಟಿದ್ದಾರೆ. ಅವರೊಂದಿಗೆ ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಮೃತಪಟ್ಟಿದ್ದಾರೆ.

ಸೈಬರ್ ಕ್ರೈಂ ತಂಡದ ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್ ಗಾಯಗೊಂಡಿದ್ದಾರೆ. ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.

ಆರೋಪಿಯ ಹುಡುಕಾಟಕ್ಕೆ ತೆರಳಿದ್ದ ಪೊಲೀಸ್ ತಂಡ ;

ಬೆಂಗಳೂರು ಸೈಬರ್ ಕ್ರೈಂ ತಂಡವು ಆರೋಪಿಯೊಬ್ಬನನ್ನು ಪತ್ತೆಹಚ್ಚುವ ಕಾರ್ಯಾಚರಣೆಗಾಗಿ ಮಧ್ಯಪ್ರದೇಶಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಪೊಲೀಸರ ಪ್ರಕಾರ, ಬಸ್ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.