ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿರ ಹುದ್ದೆಗಳಿಗೆ ನೇಮಕಾತಿ ಸಿದ್ಧತೆ, ಹಣಕಾಸು ಇಲಾಖೆ ಒಪ್ಪಿಗೆ

26-02-26 10:01 pm       HK News Staffer   ಕರ್ನಾಟಕ

ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುಮಾರು 60,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸಂಖ್ಯೆ ಅಂತಿಮಗೊಳಿಸಲು ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆದಿದೆ.

ಬೆಂಗಳೂರು, ಫೆ.26: ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುಮಾರು 60,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸಂಖ್ಯೆ ಅಂತಿಮಗೊಳಿಸಲು ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆದಿದೆ. 

ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು, ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಂತರ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ಭಾರಿ ಪ್ರಮಾಣದ ನೇಮಕಾತಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ನಾವು ಸಮ್ಮತಿ ನೀಡಿದ್ದೇವೆ. ಅಂತಿಮ ಸಂಖ್ಯೆಯನ್ನು ನಿಗದಿಪಡಿಸಲು ಇಲಾಖೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದರು. 

ರಾಜ್ಯ ಸರ್ಕಾರವು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಆಸನಗಳು ಮತ್ತು ರಾಜ್ಯ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ) ಕಾಯ್ದೆ, 2022 ಅಡಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ತಡೆಹಿಡಿದಿತ್ತು. ವಿಚಾರಣೆ ಪೂರ್ಣಗೊಳ್ಳುವ ವರೆಗೆ ಹೆಚ್ಚಿದ ಮೀಸಲಾತಿ ಆಧಾರದ ಮೇಲೆ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬಾರದು. ಈಗಾಗಲೇ ಪ್ರಾರಂಭವಾದ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಬಹುದು. ನೇಮಕಾತಿಗಳು ಅಂತಿಮ ತೀರ್ಪಿಗೆ ಒಳಪಟ್ಟಿರಬೇಕು ಎಂದು ಹೈಕೋರ್ಟ್ ಹೇಳಿತ್ತು. 

ಈ ನಡುವೆ, ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರವು 56,000–58,000 ಹುದ್ದೆಗಳನ್ನು ಭರ್ತಿ ಮಾಡಲು ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 3ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಇದೆ. ಒಪ್ಪಿಗೆ ಸಿಕ್ಕ ಬಳಿಕ ಹುದ್ದೆಗಳ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು. ಮಾರ್ಚ್ 6ರಂದು ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ 70 ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳಲ್ಲಿನ ಮಂಜೂರಾದ ಹುದ್ದೆಗಳು 7.5 ಲಕ್ಷಕ್ಕಿಂತ ಹೆಚ್ಚಿದ್ದು, ಪ್ರಸ್ತುತ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಸರಾಸರಿ ಪ್ರತಿವರ್ಷ ಸುಮಾರು 25,000 ಹುದ್ದೆಗಳು ಖಾಲಿಯಾಗುತ್ತವೆ. ಕೋವಿಡ್ ಮಹಾಮಾರಿ, ಹಣಕಾಸು ಪರಿಣಾಮಗಳು, ಕಾನೂನು ಅಡಚಣೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಅನೇಕ ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಕೈಗೊಂಡಿಲ್ಲ.