ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ, ಕಾಲೇಜು ಮುಗಿಸಿ ನಡೆದು ಹೋಗುತ್ತಿದ್ದಾಗ ಏಕಾಏಕಿ ದಾಳಿ

01-03-26 04:59 pm       HK News Desk   ಕರ್ನಾಟಕ

ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ದುರ್ದೈವಿ. 

ಮಡಿಕೇರಿ, ಮಾರ್ಚ್ 1: ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ದುರ್ದೈವಿ. 

ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ  ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.
ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಇಳಿದು ನಡೆದು ಹೋಗುತ್ತಿದ್ದಾಗ ಏಕಾಏಕಿ ಆನೆ ದಾಳಿ ನಡೆಸಿದೆ‌‌. ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. 

ಆನೆ ದಾಳಿಯಿಂದ ವಿದ್ಯಾರ್ಥಿನಿ ಬಲಿಯಾಗಿದ್ದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‌ಇಲಾಖೆಯಿಂದ ಪರಿಹಾರ ಕೊಡುವಂತೆ ಮತ್ತು ಕಾಡಾನೆ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ. ಬೆಟ್ಟತ್ತೂರಿನ ಸುತ್ತಮುತ್ತ ಆನೆಗಳು ಓಡಾಡುತಿದ್ದು ಆನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ ಮತ್ತು ಮಾನವ ಸಂಘರ್ಷ ಹೆಚ್ಚುತ್ತಿದ್ದು ಸರ್ಕಾರ ಕೂಡಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. 

ಅರಣ್ಯ ಅಧಿಕಾರಿಗಳು ಒಂದು ಬಾರಿ ಗ್ರಾಮಕ್ಕೆ ಬಂದಿದ್ದರೂ, ಆನೆಗಳನ್ನು ಓಡಿಸುವಲ್ಲಿ ಪ್ರಯತ್ನಿಸಿಲ್ಲ. ಈ ಭಾಗದಲ್ಲಿ ಕಾಡಾನೆ ಓಡಾಡುತ್ತಿದ್ದು ಕಾಫಿ ತೋಟಗಳಲ್ಲಿ ಕಾಫಿ ಮತ್ತು ತೋಟದ ಕೆಲಸ ಮಾಡಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಆತಂಕ ಹೇಳಿಕೊಂಡಿದ್ದಾರೆ.