'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ ; ಕಾಂಗ್ರೆಸ್‌ನಲ್ಲಿ ಮಹಾಪಲ್ಲಟ! ಬ್ರೇಕ್‌ಫಾಸ್ಟ್ ಸಭೆಯಲ್ಲಿ ಕಾಲಿಗೆ ಬಿದ್ದು ಸಹಕಾರ ಬೇಡಿದ ಡಿಕೆಶಿ !

28-05-26 10:56 am       HK News Staffer   ಕರ್ನಾಟಕ

ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನ ಮಹತ್ವದ ಅಧ್ಯಾಯ ಇಂದು ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನ ಮಹತ್ವದ ಅಧ್ಯಾಯ ಇಂದು ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕಳೆದ ಎರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವೇಗದ ರಾಜಕೀಯ ಬೆಳವಣಿಗೆಗಳು ನಿರ್ಣಾಯಕ ಘಟ್ಟ ತಲುಪಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಇದರ ನಡುವೆ ಮುಖ್ಯಮಂತ್ರಿ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಸಭೆ ಕರೆದಿದ್ದು, ಎಲ್ಲಾ ಸಚಿವರು ಭಾಗಿಯಾಗಿದ್ದಾರೆ. 

ಇದೇ ವೇಳೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಹಿಂದುಳಿದ ವರ್ಗ ಕುರುಬ ಜನಾಂಗದ ಸಿದ್ದರಾಮಯ್ಯ ಅವರನ್ನು ಪದಚ್ಯುತಿಗೊಳಿಸಿ ಡಿಕೆಶಿ ಸಿಎಂ ಆಗುತ್ತಿದ್ದಾರೆಂಬ ಸಂದೇಶ ಹೋಗುವುದನ್ನು ತಪ್ಪಿಸಲು ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಸಹಕಾರ ನೀಡುವಂತೆ ಕೋರಿದ್ದಾರೆ.‌ ಡಿಕೆ ಸಿಎಂ ಆದರೂ ಸಿದ್ದರಾಮಯ್ಯ ಅವರ ಸಹಕಾರ ಇಲ್ಲದೆ ಆಡಳಿತ ನಡೆಸಲು ಸಾಧ್ಯವಿಲ್ಲ ಎನ್ನುವುದನ್ನು ತಿಳಿದಿರುವ ಡಿಕೆ, ಚಾಣಾಕ್ಷ ನಡೆ ಇಟ್ಟಿದ್ದಾರೆ.‌

ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಚಿವರ ಮುಂದೆ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ. ಬ್ರೇಕ್‌ಫಾಸ್ಟ್ ಸಭೆಯ ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆಂದು ಹೇಳಲಾಗಿತ್ತು. ಇದರ ಬಗ್ಗೆ ರಾಜಭವನಕ್ಕೆ ಸಿಎಂ ಕಚೇರಿಯಿಂದ ಮಾಹಿತಿ ನೀಡಿದ್ದರೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನಿನ್ನೆ ರಾತ್ರಿ ತನ್ನ ಸಂಬಂಧಿಕರ ಅನಾರೋಗ್ಯ ನೆಪದಲ್ಲಿ ಮುಂಬೈ ತೆರಳಿದ್ದಾರೆ.‌ ಹೀಗಾಗಿ ಸಿದ್ದರಾಮಯ್ಯ ಇಂದೇ ರಾಜಿನಾಮೆ ನೀಡುತ್ತಾರೆಯೇ ಎನ್ನುವ ಕುತೂಹಲ ಇದೆ.‌

ಇನ್ನೊಂದೆಡೆ, ಸಿದ್ದರಾಮಯ್ಯ ಅವರ ಆಪ್ತ ಹಿರಿಯ ಸಚಿವರು ಹಾಗೂ ಬೆಂಬಲಿಗರು ರಾಜಿನಾಮೆ ನಿರ್ಧಾರ ಬದಲಿಸುವಂತೆ ನಿರಂತರ ಮನವಿ ಮಾಡುತ್ತಿದ್ದರೂ, ಸಿಎಂ ತಮ್ಮ ನಿಲುವಿನಲ್ಲಿ ಅಚಲರಾಗಿದ್ದಾರೆ ಎನ್ನಲಾಗಿದೆ. “ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧನಾಗಿರುತ್ತೇನೆ. ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ಅವರು ಆಪ್ತರಿಗೆ ಖಡಕ್ ಸಂದೇಶ ನೀಡಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ಲಭ್ಯವಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಸಭೆಯಲ್ಲಿ ಅಧಿಕೃತವಾಗಿ ಸಿದ್ದರಾಮಯ್ಯ ಅವರ ರಾಜೀನಾಮೆ ಘೋಷಣೆಯಾಗಲಿದ್ದು, ಹೈಕಮಾಂಡ್ ಮುಂದಿನ ಶಾಸಕಾಂಗ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರನ್ನು ಸೂಚಿಸುವ ಸಾಧ್ಯತೆಗಳು ದಟ್ಟವಾಗಿವೆ.