ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್ಕೆ 20 ಸಚಿವರ ಪ್ರಮಾಣವಚನ, 15 ಹೊಸಬರಿಗೆ ಲಕ್, ಹೆಬ್ಬಾಳ್ಕರ್ ಸೇರಿ ಹಲವರಿಗೆ ಶಾಕ್! ಸಚಿವರ ಪಟ್ಟಿಗೆ ಅಚ್ಚರಿ ಹೆಸರು ಸೇರ್ಪಡೆ

03-08-26 01:46 pm       HK News Staffer   ಕರ್ನಾಟಕ

ರಾಜ್ಯ ರಾಜಕೀಯದಲ್ಲಿ ಹಲವು ವಾರಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪೂರ್ಣ ಪ್ರಮಾಣದ ಎರಡನೇ ಅವಧಿ ಇಂದಿನಿಂದ ಆರಂಭವಾಗಲಿದ್ದು, ಇಂದು ಸಂಜೆ 4.05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ 20 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು, ಆ. 3: ರಾಜ್ಯ ರಾಜಕೀಯದಲ್ಲಿ ಹಲವು ವಾರಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪೂರ್ಣ ಪ್ರಮಾಣದ ಎರಡನೇ ಅವಧಿ ಇಂದಿನಿಂದ ಆರಂಭವಾಗಲಿದ್ದು, ಇಂದು ಸಂಜೆ 4.05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ 20 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಸಚಿವ ಸ್ಥಾನಕ್ಕಾಗಿ ಹಳ್ಳಿಯಿಂದ ದಿಲ್ಲಿವರೆಗೆ ಲಾಬಿ ನಡೆಸಿದ್ದ ಹಲವು ನಾಯಕರಿಗೆ ಕೊನೆಗೂ ಅದೃಷ್ಟ ಒಲಿದಿದ್ದು, ಕೊನೆಯ ಕ್ಷಣದ ವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಪಟ್ಟಿ ಅಂತಿಮಗೊಂಡಿದೆ. ಆದರೆ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕರಿಗೆ ಅದೃಷ್ಟ ಕೈಕೊಟ್ಟಿದ್ದು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವರು ನಿರಾಸೆಗೆ ಒಳಗಾಗಿದ್ದಾರೆ.‌

ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಎಲ್ಲಾ ಪ್ರಾದೇಶಿಕ, ಜಾತಿ, ರಾಜಕೀಯ ಹಾಗೂ ಸಂಘಟನಾ ಸಮೀಕರಣಗಳನ್ನು ಅಳೆದು ತೂಗಿ 20 ಶಾಸಕರಿಗೆ ಸಚಿವ ಸ್ಥಾನ ನೀಡಿದೆ. ಸಚಿವ ಸ್ಥಾನಕ್ಕಾಗಿ ನಿರಂತರ ಹೋರಾಟ ನಡೆಸಿದವರ ಜೊತೆಗೆ ಯಾವುದೇ ಬಹಿರಂಗ ಲಾಬಿ ಮಾಡದ ಕೆಲವು ಶಾಸಕರಿಗೂ ಈ ಬಾರಿ ಅವಕಾಶ ದೊರೆತಿರುವುದು ವಿಶೇಷ. ಇದರೊಂದಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಇಂದಿನಿಂದ ಪೂರ್ಣ ಪ್ರಮಾಣದ ಸಚಿವ ಸಂಪುಟದೊಂದಿಗೆ ಆಡಳಿತ ನಡೆಸಲಿದೆ.

ಸ್ಪೀಕರ್, ಡೆಪ್ಯೂಟಿ ಸ್ಪೀಕರ್, ಸಭಾಪತಿ ಹುದ್ದೆಗಳಿಗೂ ಅಂತಿಮ ಮುದ್ರೆ

ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ವಿಧಾನ ಮಂಡಲದ ಪ್ರಮುಖ ಹುದ್ದೆಗಳಿಗೂ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದೆ. ಹಿರಿಯ ಶಾಸಕ ಜೆ.ಎಸ್. ಪಾಟೀಲ್ ಅವರನ್ನು ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ. ಎ.ಎಸ್. ಪೊನ್ನಣ್ಣ ಡೆಪ್ಯೂಟಿ ಸ್ಪೀಕರ್ ಆಗಲಿದ್ದು, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿಯಾಗಿ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸಚಿವರಾಗುತ್ತಿರುವ 20 ಮಂದಿ ಯಾರು?

ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿಯಲ್ಲಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಹಾವೇರಿ ಶಾಸಕ ರುದ್ರಪ್ಪ ಲಮಾಣಿ, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕಲಘಟಗಿ ಶಾಸಕ ಸಂತೋಷ್ ಲಾಡ್, ಸೊರಬ ಶಾಸಕ ಮಧು ಬಂಗಾರಪ್ಪ, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಭಟ್ಕಳ ಶಾಸಕ ಮಂಕಾಳ ವೈದ್ಯ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ನಾಗಮಂಗಲ ಶಾಸಕ ಎನ್. ಚೆಲುವರಾಯಸ್ವಾಮಿ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎಂಎಲ್‌ಸಿ ಗಾಯತ್ರಿ ಶಾಂತೇಗೌಡ, ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿದೆ.

ಲೋಕಭವನದಲ್ಲಿ ಸಂಜೆ ಅದ್ಧೂರಿ ಪ್ರಮಾಣವಚನ

ಇಂದು ಸಂಜೆ ಲೋಕಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ರಾಜ್ಯ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಸಜ್ಜಾಗಿದೆ. ಹೊಸ ಸಚಿವರಿಗೆ ಯಾವ ಖಾತೆಗಳು ಸಿಗಲಿವೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ತೀವ್ರವಾಗಿದೆ. ಪ್ರಮಾಣವಚನದ ಬಳಿಕ ಖಾತೆ ಹಂಚಿಕೆ ಕುರಿತ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

665ಕ್ಕೂ ಹೆಚ್ಚು ಪೊಲೀಸರ ಭದ್ರತೆ

ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಲೋಕಭವನದ ಸುತ್ತಮುತ್ತ ಕಠಿಣ ಭದ್ರತೆ ಕಲ್ಪಿಸಲಾಗಿದೆ. ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ರೂಪಿಸಲಾಗಿದ್ದು, 665ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಮಾರಂಭಕ್ಕೆ ಆಗಮಿಸುವ ಗಣ್ಯರು, ಶಾಸಕರು, ಸಚಿವರು ಹಾಗೂ ಆಹ್ವಾನಿತ ಅತಿಥಿಗಳ ಸುರಕ್ಷತೆಗೆ ವಿಶೇಷ ಬಂದೋಬಸ್ತ್ ಮಾಡಲಾಗಿದೆ.