ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ ; ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

03-08-26 04:45 pm       HK News Staffer   ಕರ್ನಾಟಕ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್‌ನಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗವಾಗಿ ಬಂಡಾಯದ ಧ್ವನಿ ಎತ್ತಿದ್ದಾರೆ. "ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸುವ ಮೂಲಕ ಕಾಂಗ್ರೆಸ್‌ಗೆ ಹೊಸ ತಲೆನೋವು ತಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯನ್ನು "ಮೋಸ" ಎಂದು ಕರೆದಿರುವ ಅವರು, ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, ಆ. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್‌ನಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗವಾಗಿ ಬಂಡಾಯದ ಧ್ವನಿ ಎತ್ತಿದ್ದಾರೆ. "ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸುವ ಮೂಲಕ ಕಾಂಗ್ರೆಸ್‌ಗೆ ಹೊಸ ತಲೆನೋವು ತಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯನ್ನು "ಮೋಸ" ಎಂದು ಕರೆದಿರುವ ಅವರು, ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಸ್ಥಾನ ಹಂಚಿಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೇಳೂರು ಗೋಪಾಲಕೃಷ್ಣ, "ಗಾಡ್‌ಫಾದರ್ ಇರುವವರಿಗೆ, ಪ್ರಭಾವಿಗಳಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತಾ? ನಿನ್ನೆಯವರೆಗೂ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಕೊನೆಯ ಕ್ಷಣದಲ್ಲಿ ಏಕಾಏಕಿ ಕೈಬಿಟ್ಟಿದ್ದಾರೆ. ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸ ಇತ್ತು. ಆದರೆ ಉದ್ದೇಶಪೂರ್ವಕವಾಗಿ ನನ್ನನ್ನು ಕಡೆಗಣಿಸಲಾಗಿದೆ" ಎಂದು ಆರೋಪಿಸಿದರು.

"ಈಗಾಗಲೇ ಎರಡು ಬಾರಿ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ಕೊಡಲಾಗಿದೆ. ಪ್ರಭಾವಿಗಳು, ಮಾಜಿ ಸಚಿವರು, ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸಚಿವ ಸ್ಥಾನನಾ? ತಮಗೆ ಬೇಕಾದವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಇದು ನಮ್ಮಂತಹ ನಿಷ್ಠಾವಂತ ಶಾಸಕರಿಗೆ ಮಾಡಿದ ಅನ್ಯಾಯ" ಎಂದು ಅವರು ಕಿಡಿಕಾರಿದರು.

ಸಚಿವ ಸಂಪುಟ ವಿಸ್ತರಣೆಯನ್ನು ನೇರವಾಗಿ "ಮೋಸ" ಎಂದು ಬಣ್ಣಿಸಿದ ಅವರು, "ಈ ಅನ್ಯಾಯವನ್ನು ಸಹಿಸಿಕೊಂಡು ಮುಂದುವರಿಯಲು ನನ್ನಿಂದ ಸಾಧ್ಯವಿಲ್ಲ. ಆದ್ದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಘೋಷಿಸಿದರು.

ಇದೇ ವೇಳೆ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಂಕಾಳ್ ವೈದ್ಯರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದೊಳಗಿನ ಬೆಳವಣಿಗೆಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.

"ಕಾಂಗ್ರೆಸ್‌ನ ಹಲವಾರು ಅಸಮಾಧಾನಿತ ಶಾಸಕರು ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ. ನಾಳೆ ಎಲ್ಲರೂ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ" ಎಂದು ಹೇಳುವ ಮೂಲಕ ಪಕ್ಷದೊಳಗೆ ಮತ್ತಷ್ಟು ಅಸಮಾಧಾನ ಭುಗಿಲೇಳುವ ಸೂಚನೆ ನೀಡಿದರು.

"ನನಗೆ ಅನ್ಯಾಯವಾಗಿದೆ. ಸಂಪುಟ ವಿಸ್ತರಣೆ ಹೆಸರಲ್ಲಿ ಮತ್ತದೇ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ತಮಗೆ ಬೇಕಾದವರನ್ನು ಸಂಪುಟದಲ್ಲಿ ಸೇರಿಕೊಳ್ಳಲಾಗಿದ್ದು, ನಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದನ್ನು ಸಹಿಸಿಕೊಂಡಿರಲು ನನ್ನಿಂದ ಸಾಧ್ಯವಿಲ್ಲ. ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಬೇಳೂರು ಗೋಪಾಲಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ.

ಒಟ್ಟು 20 ಶಾಸಕರು ಇಂದು ಸಂಜೆ 4.05ಕ್ಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ, ಸಚಿವ ಸ್ಥಾನ ನಿರೀಕ್ಷಿಸಿದ್ದ ಹಲವು ಕಾಂಗ್ರೆಸ್ ಶಾಸಕರ ಅಸಮಾಧಾನ ಬಹಿರಂಗವಾಗಿದೆ. ಅದರಲ್ಲೂ ಬೇಳೂರು ಗೋಪಾಲಕೃಷ್ಣ ಅವರ ರಾಜೀನಾಮೆ ಘೋಷಣೆ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಹೊಸ ಸಂಕಷ್ಟ ಸೃಷ್ಟಿಸುವ ಸಾಧ್ಯತೆ ಇದೆ.