ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕೋಟಿ ವೆಚ್ಚದ ಭೂಗತ ವಿದ್ಯುತ್ ಕೇಬಲ್ ಯೋಜನೆಗೆ ಸರ್ಕಾರದ ಮಂಜೂರಾತಿ

26-04-26 04:30 pm       HK News Staffer   ಕರಾವಳಿ

ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ವಿದ್ಯುತ್‌ ಸೌಲಭ್ಯದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆ ಉಂಟು ಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರವು ಮಂಜೂರಾತಿ ನೀಡಿದೆ.

ಮಂಗಳೂರು, ಎಪ್ರಿಲ್ 26 : ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ವಿದ್ಯುತ್‌ ಸೌಲಭ್ಯದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆ ಉಂಟು ಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರವು ಮಂಜೂರಾತಿ ನೀಡಿದೆ. 

ಪ್ರತಿ ವರ್ಷ ಮಂಗಳೂರು ದಸರಾ ಮೆರವಣಿಗೆ ಸಂದರ್ಭದಲ್ಲಿ ಸಾಲು ಸಾಲಾಗಿ ಸಾಗುವ ಎತ್ತರದ ಸ್ತಬ್ಧಚಿತ್ರಗಳು ಮತ್ತು ರಥಗಳಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗಳು ದೊಡ್ಡ ಅಡಚಣೆಯಾಗಿದ್ದವು. ಸುರಕ್ಷತೆ ದೃಷ್ಟಿಯಿಂದ ಮೆರವಣಿಗೆ ಸಮಯದಲ್ಲಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡ ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿಯವರು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತ್ತು. 

ಸಮಸ್ಯೆಯ ಗಂಭೀರತೆಯನ್ನು ಅರಿತ ಯು.ಟಿ. ಖಾದರ್ ಫರೀದ್ ಅವರು, ಇದನ್ನು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವನ್ನಾಗಿ ನೋಡದೆ ಮಂಗಳೂರಿನ ಘನತೆಯ ಪ್ರಶ್ನೆಯಾಗಿ ಸ್ವೀಕರಿಸಿ, ಇಂಧನ ಸಚಿವರೊಂದಿಗೆ ಸತತ ಸಂಪರ್ಕವನ್ನು ಸಾಧಿಸಿ, ಬೃಹತ್ ಯೋಜನೆಗೆ ಅನುಮೋದನೆ ದೊರಕಿಸುವಲ್ಲಿ ಶ್ರಮಿಸಿದ್ದಾರೆ. ಟೆಂಡರ್ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಿ, ಕಾಮಗಾರಿಯ ಆರಂಭಕ್ಕೆ ಹಸಿರು ನಿಶಾನೆ ತೋರುವ ಮೂಲಕ ತಮ್ಮ 'ಕಾರ್ಯದಕ್ಷತೆ'ಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ. 

ಯೋಜನೆಯಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಪಘಾತಗಳ ಭಯವಿಲ್ಲದೆ ಮೆರವಣಿಗೆ ಸುಗಮವಾಗಿ ಸಾಗಲಿದ್ದು, ಮಳೆಗಾಲದಲ್ಲಿ ಮರಗಳು ಬಿದ್ದು ವಿದ್ಯುತ್ ವ್ಯತ್ಯಯವಾಗುವ ಸಮಸ್ಯೆಗೂ ಮುಕ್ತಿ ಸಿಗಲಿದೆ. ಅಷ್ಟೇ ಅಲ್ಲದೆ, ರಸ್ತೆಗಳಲ್ಲಿ ವಿದ್ಯುತ್ ತಂತಿಗಳ ಜಾಲವಿಲ್ಲದೆ ಮಂಗಳೂರು ನಗರವು ಮತ್ತಷ್ಟು ಸುಂದರವಾಗಿ ಕಂಗೊಳಿಸಲಿದೆ. ಇದರ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.