ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಅಭಿಷೇಕ್ ವಿರುದ್ಧ ಎಸ್‌ಐಟಿಗೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ದೂರು, ಕುಟುಂಬಕ್ಕೆ ರಕ್ಷಣೆ ಒದಗಿಸಲು ಮನವಿ

15-06-26 04:52 pm       HK News Staffer   ಕರಾವಳಿ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನ್ನ ಮೇಲೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಸ್ಕ್‌ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಅವರು ವಿಶೇಷ ತನಿಖಾ ತಂಡ (SIT)ಕ್ಕೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಬೆಂಗಳೂರು, ಜೂನ್ 15: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬಳಿಕ ತನ್ನ ಮೇಲೆ ಬೆದರಿಕೆ ಹಾಗೂ ಮಾನಸಿಕ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಸ್ಕ್‌ಮ್ಯಾನ್ ಚಿನ್ನಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಅವರು ವಿಶೇಷ ತನಿಖಾ ತಂಡ (SIT)ಕ್ಕೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಪತ್ನಿಯೊಂದಿಗೆ ಆಗಮಿಸಿದ ಚಿನ್ನಯ್ಯ, ಪ್ರಕರಣದ ತನಿಖಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಚಿನ್ನಯ್ಯ ಸಲ್ಲಿಸಿರುವ ದೂರಿನ ಪ್ರಕಾರ, ಧರ್ಮಸ್ಥಳ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ತಾನು ಸಲ್ಲಿಸಿರುವ ರಿಟ್ ಅರ್ಜಿಯ ಹಿಂದೆ ಯಾರು ಇದ್ದಾರೆ?, ನಿಮಗೆ ಯಾರು ಸಹಾಯ ಮಾಡುತ್ತಿದ್ದಾರೆ?, ಈ ಕೆಲಸವನ್ನು ಯಾರ ಪ್ರೇರಣೆಯಿಂದ ಮಾಡುತ್ತಿದ್ದೀರಿ? ಎಂಬ ಪ್ರಶ್ನೆಗಳನ್ನು ಪದೇ ಪದೇ ಕೇಳಿ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ, ತನ್ನ ಮೊಬೈಲ್ ಸಂಖ್ಯೆ ಪಡೆದು ನೇರವಾಗಿ ಮಾತನಾಡಲು ಒತ್ತಾಯ ಮಾಡಲಾಗಿದೆ. ತನ್ನ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಲಾಗಿದೆ. ಈ ಎಲ್ಲ ಬೆಳವಣಿಗೆಗಳು ಪರೋಕ್ಷ ಬೆದರಿಕೆ ಹಾಗೂ ಮಾನಸಿಕ ಕಿರುಕುಳದ ಸ್ವರೂಪದಲ್ಲಿವೆ ಎಂದು ಚಿನ್ನಯ್ಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ W.P. No. 17331/2026 ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದ ತನಿಖೆಯ ಪ್ರಗತಿ ಹಾಗೂ ಪ್ರಸ್ತುತ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಆದೇಶ ಹೊರಬಿದ್ದ ಬಳಿಕ ಪ್ರಕರಣದ ಇತರ ಆರೋಪಿಗಳು ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಮುಂದಾಗಿದ್ದಾರೆ. ದೂರವಾಣಿ ಕರೆಗಳ ಮೂಲಕ ಬೆದರಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಚಿನ್ನಯ್ಯ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನೆಲ್‌ನ ಅಭಿಷೇಕ್ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ಮತ್ತು ತನ್ನ ಕುಟುಂಬ ಸದಸ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಚಿನ್ನಯ್ಯ ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚಿನ್ನಯ್ಯ ಅವರ ದೂರಿನೊಂದಿಗೆ ಧರ್ಮಸ್ಥಳ ಪ್ರಕರಣದ ತನಿಖೆಗೆ ಮತ್ತೊಂದು ಹೊಸ ಆಯಾಮ ಸಿಕ್ಕಿದ್ದು, ಎಸ್‌ಐಟಿ ಈ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.