ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸೋನಿಯಾ ಗಾಂಧಿ ಅಪಮಾನ ; ಉರ್ವಾ ಠಾಣೆಗೆ ಪೊಲೀಸ್ ದೂರು

16-08-26 03:47 pm       HK News Staffer   ಕರಾವಳಿ

ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಸೂಚಿಸಿ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಂಗಳೂರು, ಆ.16 : ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸಲು ಸೂಚಿಸಿ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. 

ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ರಾಷ್ಟ್ರೀಯ ಗೌರವಕ್ಕೆ ಅಪಮಾನ ಹಾಗೂ ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆಯನ್ನು ಅವಮಾನಿಸಿ ಶಾಂತಿಭಂಗಕ್ಕೆ ಕಾರಣವಾಗುವ ರೀತಿ ನಡೆದುಕೊಂಡಿದ್ದಾರೆ. ಇದು ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆಗಟ್ಟುವ ಕಾಯ್ದೆಯ ಕಲಂ 3ರಡಿ ಮತ್ತು ಬಿಎನ್ಎಸ್ ಸೆಕ್ಷನ್ 195 ಮತ್ತು 352 ಪ್ರಕಾರ ಅಪರಾಧವಾಗಿದ್ದು ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. 

ದೂರು ಸ್ವೀಕರಿಸಿರುವ ಉರ್ವಾ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ವಿಕಾಸ್ ತಿಳಿಸಿದ್ದಾರೆ.