ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಶಾಸಕ ಅಶೋಕ ರೈ ಮುಖ್ಯಮಂತ್ರಿಗೆ ಮನವಿ

29-08-26 04:39 pm       HK News Staffer   ಕರಾವಳಿ

ಮಂಗಳೂರಿನಲ್ಲಿ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪುತ್ತೂರು, ಆ.29: ಮಂಗಳೂರಿನಲ್ಲಿ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈ ಮನವಿಯನ್ನು ಸಲ್ಲಿಸಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಹಿಂದಿನ ಅಧಿವೇಶನದಲ್ಲೂ ಸಹ ಚರ್ಚಿಸಲಾಗಿದೆ. ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸುವುದಾಗಿ ಈ ಹಿಂದಿನ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಬಹಿರಂಗ ಸಮಾವೇಶದಲ್ಲಿ ಆಶ್ವಾಸನೆಯನ್ನೂ ನೀಡಿದ್ದರು ಎಂದವರು ತಿಳಿಸಿದ್ದಾರೆ. 

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು ಸಮಿತಿ ಸದಸ್ಯರು ಅಲ್ಲಿಗೆ ತೆರಳಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಇತರೇ ಸ್ಥಳೀಯ ಭಾಷೆಗಳನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಅಂಗೀಕಾರ ಮಾಡಿದ್ದು ಈ ಬಗ್ಗೆ ಮಾಹಿತಿಯನ್ನು ತರಿಸಿಕೊಳ್ಳಲಾಗಿತ್ತು. ಸ್ಥಳೀಯ ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ರೂಪಿಸುವಲ್ಲಿ ಆಂಧ್ರ ಸರ್ಕಾರ ಅಳವಡಿಸಿರುವ ಮಾನದಂಡಗಳೇನು ಎಂಬುದರ ಬಗ್ಗೆ ಸದನದಲ್ಲಿ ಸರ್ಕಾರ ಗಮನಕ್ಕೆ ತಂದಿದ್ದೆ. ಈ ಬಗ್ಗೆ ಕ್ರಮ ವಹಿಸುವುದಾಗಿ ಸದನದಲ್ಲಿ ಭರವಸೆಯೂ ಸಿಕ್ಕಿತ್ತು ಎಂದು ಅಶೋಕ ರೈ ಮನವಿಯಲ್ಲಿ ತಿಳಿಸಿದ್ದಾರೆ. 

ತುಳು ಭಾಷೆಗೆ ಲಿಪಿಯಿದ್ದು, ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಪ್ರಾಚೀನ ಭಾಷೆಯಾಗಿರುತ್ತದೆ ಮತ್ತು ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ. ಈಗಾಗಲೇ ಆಂಧ್ರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಿರುವಂತೆ, ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲೇ ಘೋಷಣೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.