UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್‌ ಆರೋಪ ; ಕೆ.ಆರ್.ಐ.ಡಿ.ಎಲ್ ಇಬ್ಬರು ಇಂಜಿನಿಯರುಗಳ ಅಮಾನತಿಗೊಳಿಸಿ ತನಿಖೆ ನಡೆಸಲು ಮುಖ್ಯಮಂತ್ರಿಗೆ ಸಚಿವ ಯು.ಟಿ ಖಾದರ್ ಪತ್ರ

02-09-26 10:30 pm       HK News Desk   ಕರಾವಳಿ

ಸಚಿವರ ಹೆಸರಲ್ಲಿ ಕಮಿಷನ್ ಕೇಳುತ್ತಿದ್ದಾರೆಂಬ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ

ಮಂಗಳೂರು, ಸೆ.2: ಸಚಿವರ ಹೆಸರಲ್ಲಿ ಕಮಿಷನ್ ಕೇಳುತ್ತಿದ್ದಾರೆಂಬ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಹಾಗೂ ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 

ಕೆ.ಆರ್.ಐ.ಡಿ.ಎಲ್ ಸಂಸ್ಥೆಯಿಂದ ನಿರ್ವಹಿಸಲಾಗುತ್ತಿರುವ ಸರಕಾರಿ ಕಾಮಗಾರಿಗಳಿಗೆ ಸಾಮಾಗ್ರಿ ಪೂರೈಸುವ ಗ್ರೂಪ್ ಲೀಡರ್‌ಗಳಿಂದ ಇಲಾಖಾ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಡುವುದಕ್ಕಾಗಿ ಎಂದು ಕಮಿಷನ್‌ ಪಡೆಯುತ್ತಿರುವುದಾಗಿ ಆರೋಪವಿದೆ. ಈ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ತಕ್ಷಣ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುತ್ತಾರೆ. 

ಈ ಹಿನ್ನೆಲೆಯಲ್ಲಿ ಆರೋಪಕ್ಕೀಡಾದ ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಮಂಗಳೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿರಿಸಿ ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಈ ಮೂಲಕ ಕೋರುತ್ತೇನೆ ಎಂದು ಉಸ್ತುವಾರಿ ಸಚಿವ ಯು.ಟಿ ಖಾದರ್, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಕೆಆರ್ ಐಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದರು.